Friday, January 25, 2019

ಸೋಂದಾ ಕ್ಷೇತ್ರ: ಕ್ಷೇತ್ರಪರಿಚಯ

ಸೋಂದಾ ಕ್ಷೇತ್ರ

ಕ್ಷೇತ್ರಪರಿಚಯ

ಸೋಂದಾ ಕ್ಷೇತ್ರ ಬೆಂಗಳೂರಿನಿಂದ ಸುಮಾರು ನಾಲ್ಕುನೂರು ಕಿ.ಮೀ ದೂರದಲ್ಲಿ ನೆಲೆಸಿದೆ.

 ಶಿರಸಿ ಯಿಂದ ೩೫ ಕಿ.ಮೀ ದೂರ ಸಾಗಿದರೆ ಈ ಕ್ಷೇತ್ರ ಸಿಗುವುದು. ಸುತ್ತಲೂ ಹಸಿರು ಕಾಡು, ರಮ್ಯ ವಾತಾವರಣ ಸುಂದರವಾದ ಕೆರೆಯಿಂದ ಸದಾಕಾಲ ಭಕ್ತರನ್ನು ಆಕರ್ಷಿಸುತ್ತಿದೆ.

 ಈ ಕ್ಷೇತ್ರಕ್ಕೆ ಸೋಂದ, ಸೋದೆ, ಸ್ವಾದಿ ಎಂದು ಸಹ ಕರೆಯುತ್ತಾರೆ. ಹೆಚ್ಚಾಗಿ ಮಾಧ್ವ ಬ್ರಾಹ್ಮಣರು ಭೇಟಿ ಕೊಡುವ ಈ ಕ್ಷೇತ್ರದಲ್ಲಿ ವಾದಿರಾಜರ ಮೂಲ ಬೃಂದಾವನ, ರಮಾತ್ರಿವಿಕ್ರಮ ದೇವರ ಗುಡಿ, ಭೂತರಾಜರ ಸನ್ನಿಧಿ, ಧವಳ ಗಂಗಾ, ಮುಖ್ಯಪ್ರಾಣ ದೇವರು, ಗೋಪಾಲಕೃಷ್ಣ, ಸಂತಾನ ಗೋಪಾಲಕೃಷ್ಣ, ಅರಳಿಕಟ್ಟೆ, ನಾಗಬನ, ವೇದ ಮಂದಿರ, ಪಾಪ ವಿಮೋಚನಾ ತೀರ್ಥ, ಚಂದ್ರಮೌಳೇಶ್ವರ, ಹಾಗೂ ವೀಣೆಸಹಿತ ಹನುಮಂತ ದೇವರು ಇಲ್ಲಿ ನೆಲೆಸಿದ್ದಾರೆ.

ಆ ಜಾಗದಿಂದ ಸ್ವಲ್ಪ ದೂರ ಕಾಡಿನ ಹಾದಿಯಲ್ಲಿ ನಡೆದು ಸಾಗಿದರೆ ಶಾಲ್ಮಲಿ ನದಿ ಹರಿಯುವ ತಪೋವನ ಎಂಬ ಅದ್ಭುತವಾದ ಸ್ಥಳವಿದೆ.

ಮುಂಚೆ ಈ ಜಾಗಕ್ಕೆ ನಡೆದೇ ಹೋಗಬೇಕಿತ್ತು. ಇತ್ತೀಚಿಗೆ ವಾಹನ ವ್ಯವಸ್ಥೆಯನ್ನು ಸಹ ಮಾಡಿದ್ದರೆ. ಸೋಂದಾ ಕ್ಷೇತ್ರಕ್ಕೆ ಬರುವ ಬಹುಪಾಲು ಜನ ತಪೋವನಕ್ಕೆ ಖಂಡಿತವಾಗಿ ಭೇಟಿ ಕೊಡುವರು . ಹಾಗೆಯೇ ಸೋಂದಾ ಕ್ಷೇತ್ರದ ಸುತ್ತ ಮುತ್ತ ನೋಡಬಹುದಾದ ಜಾಗಗಳೆಂದರೆ ಸ್ವರ್ಣವಲ್ಲಿ ಮಠ, ವೆಂಕಟರಮಣ ದೇವಸ್ಥಾನ ಸಹ ಉಂಟು.

ಮಳೆಗಾಲದಲ್ಲಂತೂ ಇಲ್ಲಿನ ಸೌಂದರ್ಯ ವರ್ಣಿಸಲು ಪದಗಳು ಸಾಲದು. ಮಳೆಗಾಲದಲ್ಲಿ ವಾರಾಂತ್ಯಗಳು ಬಿಟ್ಟರೆ ವಾರದ ದಿನಗಳಲ್ಲಿ ಹೆಚ್ಚು ಜನಸಂದಣಿ ಇರುವುದಿಲ್ಲ.

ಪ್ರಶಾಂತವಾಗಿರುತ್ತದೆ ಸದಾಕಾಲ ಸುರಿಯುತ್ತಿರುವ ಆ ಮಳೆಯನ್ನೂ ನೋಡುವುದೇ ಕಣ್ಣಿಗೊಂದು ಹಬ್ಬ. ಆದರೆ ಒಂದೇ ಒಂದು ತೊಂದರೆ ಎಂದರೆ ಮಳೆಗಾಲದಲ್ಲಿ ತಪೋವನಕ್ಕೆ ಭೇಟಿ ಕೊಡಲು ಸಾಧ್ಯವಿಲ್ಲ. ಏಕೆಂದರೆ ಕಾಡಿನ ಹಾದಿಯಾದ್ದರಿಂದ ಜಿಗಣೆಗಳ ಕಾಟ ಹೆಚ್ಚಾಗಿ ಇರುತ್ತದೆ.

ಇನ್ನು ಈ ಕ್ಷೇತ್ರದ ಊಟದ ರುಚಿಯ ಬಗ್ಗೆಯಂತೂ ಎರಡು ಮಾತಿಲ್ಲ. ಬೇಸಿಗೆಯಲ್ಲಿ ಇಲ್ಲಿನ ವಿಶೇಷ ಹಲಸಿನಕಾಯಿ ಹುಳಿ ಮಳೆಗಾಲದಲ್ಲಿ ಮಂಗಳೂರು ಸೌತೆಕಾಯಿ ಹುಳಿ. ಆಹಾ ಆ ರುಚಿಯನ್ನು ಅನುಭವಿಸಿಯೇ ತೀರಬೇಕು.

ಕ್ಷೇತ್ರ ಮಹಿಮೆ

ಇಲ್ಲಿನ ಮುಖ್ಯ ದೇವರು ಶ್ರೀ ರಮಾತ್ರಿವಿಕ್ರಮ ದೇವರು, ಶ್ರೀ ವಾದಿರಾಜರು ಮತ್ತು ಶ್ರೀ ಭೂತರಾಜರು.

 ಶ್ರೀ ವಾದಿರಾಜರು ಯತಿಗಳು. ಅವರ ಮೂಲ ಬೃಂದಾವನ ಇಲ್ಲಿಯೇ ಇರುವುದು. ಪ್ರತಿನಿತ್ಯ ಪ್ರಾತಹ ಕಾಲದಲ್ಲಿ ಮತ್ತು ಸಂಧ್ಯಾಕಾಲದಲ್ಲಿ ಇಲ್ಲಿ ಪೂಜೆಗಳು ನಡೆಯುತ್ತವೆ.

ಭೂತರಾಜರು :

ಇಲ್ಲಿನ ವಿಶೇಷ ಪೂಜೆ ಎಂದರೆ ಭೂತರಾಜರಿಗೆ ಅನ್ನದ ಬಲಿ ಪೂಜೆ. ಬೇಸಿಗೆ ಕಾಲದಲ್ಲಿ ರಮಾತ್ರಿವಿಕ್ರಮ ದೇವಸ್ಥಾನದ ಮುಂಭಾಗದಲ್ಲಿ ಇರುವ ವಿಶೇಷ ಪೀಠದಲ್ಲಿ ಈ ಪೂಜೆ ನೆರವೇರಿಸಲಾಗುವುದು. ಮಳೆಗಾಲದಲ್ಲಿ ಅಲ್ಲಿ ನಡೆಸಲು ಆಗದ ಕಾರಣ ಭೂತರಾಜರ ಗುಡಿಯ ಮುಂದೆಯೇ ಮಾಡುತ್ತಾರೆ.


 ಎರಡು ಅಡಿಯಷ್ಟು ಎತ್ತರಕ್ಕೆ ಅನ್ನದ ರಾಶಿ ಹಾಕಿ ಅದಕ್ಕೆ ಕುಂಕುಮದ ನೀರನ್ನು ಕಲಸಿ ಅನ್ನದ ರಾಶಿಗೆ ಆ ನೀರನ್ನು ಹಾಕಿ ಕೆಂಪನೆ ಬಣ್ಣದ ರಾಶಿ ಮಾಡಿ ಅದಕ್ಕೆ ಒಡೆದ ತೆಂಗಿನ ಕಾಯಿಯನ್ನು ಕಣ್ಣಿನಂತೆ ಇತ್ತು ಅದಕ್ಕೊಂದು ರೂಪ ಕೊಟ್ಟು ಅದರ ಮುಂದೆ ಕುಳಿತು ವಿಶೇಷ ಪೂಜೆ ಸಲ್ಲಿಸುತ್ತಾರೆ. ನಂತರದಲ್ಲಿ ಒಂದು ಪಂಜನ್ನು ಸಿದ್ಧಮಾಡಿ ಅದರಿಂದಲೇ ಆರತಿ ಮಾಡಿ ನಂತರ ಕಲಸಿದ್ದ ಕುಂಕುಮದ ನೀರನ್ನು ಆ ಪಂಜಿನ ಮೂಲಕ ನೆರೆದಿದ್ದ ಭಕ್ತರ ಮೇಲೆ ಪ್ರೋಕ್ಷಣೆ ಮಾಡುತ್ತಾರೆ. ನಂತರ ಅದೇ ನೀರನ್ನು ತೀರ್ಥವನ್ನಾಗಿ ನೀಡುತ್ತಾರೆ. ಪ್ರತಿದಿನವೂ ಈ ಪೂಜೆ ನಡೆದರೂ ಹುಣ್ಣಿಮೆಯಂದು ಬಹಳ ವಿಶೇಷ ಈ ಪೂಜೆಗೆ.

ಮುಂದು ವರೆಯುವದು....

ವಾದಿರಾಜ ಪಾಹಿಮಾಂ ಭೂತರಾಜ ರಕ್ಷಮಾಂ

No comments:

Post a Comment

ಯಾವಯಾವ ಸಂದರ್ಭಗಳಲ್ಲಿ ಗುರುಹಿರಿಯರಿಗೆ ನಮಸ್ಕಾರ ಮಾಡಬಾರದು !

ಓಂ ಶ್ರೀ ಸತ್ಯಾತ್ಮತೀರ್ಥ ಗುರುಭ್ಯೋಃ ನಮಃ ಯಾವಯಾವ ಸಂದರ್ಭಗಳಲ್ಲಿ ಗುರುಹಿರಿಯರಿಗೆ ನಮಸ್ಕಾರ ಮಾಡಬಾರದು ! ಕೆಲವೊಂದು ಸಂದರ್ಭದಲ್ಲಿ ಈ ಬ್ರಾಹ್ಮಣರೇ ಮೊದಲಾದ ಗುರು...